Category: ದಿನನಿತ್ಯದ ಸುದ್ದಿ

  • ಧರ್ಮಸ್ಥಳ ಪ್ರಕರಣ: “ತನಿಖೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ನಡೆಯಲಿ”ವಕೀಲರು ಸಿದ್ದರಾಮಯ್ಯರಲ್ಲಿ ಆಗ್ರಹಿಸಲು ಕಾರಣವೇನು?

    ಧರ್ಮಸ್ಥಳ ಪ್ರಕರಣ: “ತನಿಖೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ನಡೆಯಲಿ”ವಕೀಲರು ಸಿದ್ದರಾಮಯ್ಯರಲ್ಲಿ ಆಗ್ರಹಿಸಲು ಕಾರಣವೇನು?

    ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಗೃಹ ಕಚೇರಿ ಕೃಷ್ಣಾದಲ್ಲಿ, ಹಿರಿಯ ವಕೀಲರಾದ ಬಾಲನ್, ಡಾ.ಸಿ.ಎಸ್.ದ್ವಾರಕನಾಥ್, ಉಮಾಪತಿ, ಸುಧಾ ಕಟ್ಟಾ ಹಾಗೂ ಸಾಮಾಜಿಕ ಕಾರ್ಯಕರ್ತ ಟಿ.ನರಸಿಂಹಮೂರ್ತಿಯನ್ನೊಳಗೊಂಡ ನಿಯೋಗವು ಭೇಟಿಯಾಗಿ ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ರಚನೆ ಮಾಡುವುದು ಮಾತ್ರವಲ್ಲದೆ, ತನಿಖೆಯ ಹೊಣೆಯನ್ನು ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರು ಅಥವಾ ಎಡಿಜಿಪಿಗೆ ವಹಿಸಬೇಕು ಎಂದು ಒತ್ತಾಯಿಸಿದರು.

    ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಸಿ.ಎಸ್.ದ್ವಾರಕನಾಥ್, “ದಿನೇ ದಿನೇ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಪ್ರಕರಣಗಳು ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿವೆ. ಇದರ ನಡುವೆ ಹಲವಾರು ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಸಾಕ್ಷಿದಾರ ಬಂದಿದ್ದು, ಆತನಿಗೆ ಸೂಕ್ತ ರಕ್ಷಣೆ ನೀಡುವ ಜವಾಬ್ದಾರಿ ರಾಜ್ಯ ಸರಕಾರದ್ದು. ಧರ್ಮಸ್ಥಳ ವ್ಯಾಪ್ತಿಯಲ್ಲಿ ಮಹಿಳೆಯರ ಮೇಲೆ ಮಾತ್ರ ದೌರ್ಜನ್ಯ ನಡೆದಿಲ್ಲ. ಬದಲಾಗಿ ಭಿಕ್ಷುಕರನ್ನು ಹತ್ಯೆ ಮಾಡಿರುವ ಆರೋಪಗಳು ಇವೆ” ಎಂದು ಹೇಳಿದರು.
    “ಇನ್ನೂ, ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದ ಸಾಕ್ಷಿ ದೂರುದಾರ ಜು.11ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ್ದು, ತಾನು ಹೂತು ಹಾಕಿದ್ದ ಮೃತದೇಹವೊಂದನ್ನು ಹೊರತೆಗೆದಿರುವುದಾಗಿ ಹೇಳಿದ್ದಾನೆ. ಹೀಗಿರುವಾಗ ರಾಜ್ಯ ಸರಕಾರ ತುರ್ತು ಎಸ್‌ಐಟಿ ರಚನೆ ಮಾಡಬೇಕು. ಎಲ್ಲ ಸಾಕ್ಷ್ಯಗಳನ್ನು ರಕ್ಷಣೆ ಮಾಡಬೇಕು. ಜತೆಗೆ, ಉನ್ನತ ತನಿಖೆ ನಡೆಯಬೇಕು” ಎಂದು ಆಗ್ರಹಿಸಿದರು.

    “ಧರ್ಮಸ್ಥಳ ವ್ಯಾಪ್ತಿಯಲ್ಲಿ ಇತ್ತೀಚೆಗೆ ಪ್ರಕರಣಗಳ ಬೆಳವಣಿಗೆಯ ತನಿಖೆ ಎಲ್ಲವೂ ಓರ್ವ ಸಾಮಾನ್ಯ ಇನ್‌ ಸ್ಪೆಕ್ಟರ್ ನೇತೃತ್ವದಲ್ಲಿ ನಡೆಯುತ್ತಿದೆ. ಈ ಇನ್‌ಸ್ಪೆಕ್ಟರ್ ಡಿವೈಎಸ್ಪಿ ಆದೇಶ ಪಾಲನೆ ಮಾಡಬೇಕು. ಆದರೆ, ವಾಸ್ತವ ಬೇರೆಯೇ ಇದ್ದು, ಅಲ್ಲಿನ ದೊಡ್ಡ ಯಜಮಾನರೇ ಡಿವೈಎಸ್ಪಿಯನ್ನು ನಿಯೋಜನೆ ಮಾಡಿಕೊಂಡಿದ್ದಾರೆ. ಎಸ್‌ಐಟಿ ರಚನೆ ಮಾಡುವಂತೆ ಕೋರಿ ಸಲ್ಲಿಸಿದ ನಮ್ಮ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದು ಮಾತ್ರವಲ್ಲದೆ, ಗೃಹ ಇಲಾಖೆಯೊಂದಿಗೆ ಚರ್ಚೆ ನಡೆಸಿ ಆನಂತರ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ” ಎಂದು ದ್ವಾರಕನಾಥ್ ಹೇಳಿದರು.

    ಮನವಿಯಲ್ಲೇನಿದೆ?
    ಎಡಿಜಿಪಿ ಅಥವಾ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಎಸ್‌ ಐಟಿ ತನಿಖೆ ನಡೆಯಬೇಕು.
    ಸಾಕ್ಷ್ಯಗಳನ್ನು ರಕ್ಷಣೆ ಮಾಡಬೇಕು.
    ದಾಖಲಾಗಿರುವ ದೂರುಗಳನ್ನು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕು.
    ಸಾಕ್ಷಿದಾರರಿಗೆ ಸೂಕ್ತ ರಕ್ಷಣೆ ನೀಡಬೇಕು.
    ಕಳಂಕಿತ ಪೊಲೀಸ್ ಅಧಿಕಾರಿಗಳನ್ನು ತನಿಖೆಯಿಂದ ದೂರ ಇಡಬೇಕು.

  • ಮೂಡಬಿದ್ರೆ ಕಾಲೇಜೊಂದರ ವಿದ್ಯಾರ್ಥಿನಿಯ ಅತ್ಯಾಚಾರ:
ಉಪನ್ಯಾಸಕ ಸೇರಿ ಮೂವರ ಬಂಧನ

    ಮೂಡಬಿದ್ರೆ ಕಾಲೇಜೊಂದರ ವಿದ್ಯಾರ್ಥಿನಿಯ ಅತ್ಯಾಚಾರ: ಉಪನ್ಯಾಸಕ ಸೇರಿ ಮೂವರ ಬಂಧನ

    ಮಂಗಳೂರು: ವಿದ್ಯಾರ್ಥಿನಿಯನ್ನು ಬ್ಲ್ಯಾಕ್‌ಮೇಲ್‌ ಮಾಡಿ ಅತ್ಯಾಚಾರ ಮಾಡಿದ್ದ ಆರೋಪದಡಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರೊಂದಿಗೆ ಸ್ನೇಹಿತನನ್ನು ಮಾರತ್‌ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
    19 ವರ್ಷದ ಸಂತ್ರಸ್ತೆ ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
    ಕಾಲೇಜಿನ ಭೌತವಿಜ್ಞಾನ ವಿಭಾಗದ ಉಪನ್ಯಾಸಕ ನರೇಂದ್ರ, ಜೀವವಿಜ್ಞಾನ ವಿಭಾಗದ ಉಪನ್ಯಾಸಕ ಸಂದೀಪ್‌ ಹಾಗೂ ಅವರ ಸ್ನೇಹಿತ ಬೆಂಗಳೂರು ನಿವಾಸಿ ಅನೂಪ್‌ ಬಂಧಿತರು.
    ‘ಘಟನೆಯು ಕೆಲವು ತಿಂಗಳ ಹಿಂದೆ ನಡೆದಿತ್ತು. ಆರೋಪಿಗಳ ಬ್ಲ್ಯಾಕ್‌ಮೇಲ್‌ ಹೆಚ್ಚಾದ ಮೇಲೆ ಮಹಿಳಾ ಆಯೋಗಕ್ಕೆ ಕಳೆದ ವಾರ ಪೋಷಕರ ಜತೆಗೆ ಬಂದು ವಿದ್ಯಾರ್ಥಿನಿ ದೂರು ನೀಡಿದ್ದರು. ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ದೂರನ್ನು ವೈಟ್‌ಫೀಲ್ಡ್‌ ವಿಭಾಗದ ಡಿಸಿಪಿಗೆ ವರ್ಗಾಯಿಸಿ ತನಿಖೆಗೆ ಸೂಚನೆ

    ನೀಡಿದ್ದರು. ಮಾರತ್‌ಹಳ್ಳಿ ಠಾಣೆಯ ಪೊಲೀಸರು ತನಿಖೆ ನಡೆಸಿ ಮೂವರನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ನೋಟ್ಸ್ ನೀಡುವ ನೆಪದಲ್ಲಿ ಕೃತ್ಯ:
    ‘ಭೌತವಿಜ್ಞಾನ ವಿಭಾಗದ ಉಪನ್ಯಾಸಕ ನರೇಂದ್ರ ನೋಟ್ಸ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿಗೆ ಹತ್ತಿರವಾಗಿದ್ದ. ಬಳಿಕ ಆಕೆಯ ಜತೆಗೆ ವಾಟ್ಸ್‌ಆ್ಯಪ್‌ನಲ್ಲಿ ಚಾಟ್ ಮಾಡುವುದು, ನೋಟ್ಸ್ ಕಳುಹಿಸುವುದು ಮಾಡುತ್ತಿದ್ದ. ಅಲ್ಲಿ ಶಿಕ್ಷಣ ಪೂರೈಸಿ ಆಕೆ ಬೆಂಗಳೂರಿಗೆ ಬಂದ ನಂತರವೂ ಸಂದೇಶ ಕಳುಹಿಸುತ್ತಿದ್ದ. ನೋಟ್ಸ್ ನೀಡುವುದನ್ನೂ ಮುಂದುವರಿಸಿದ್ದ. ಅದೇ ನೆಪದಲ್ಲಿ ಮಾರತ್‌ಹಳ್ಳಿಯ ಗೆಳೆಯನ ಕೊಠಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಈ ವಿಷಯವನ್ನು ಯಾರಿಗಾದರೂ ಹೇಳಿದರೆ, ತೊಂದರೆ ಅನುಭವಿಸಬೇಕಾಗುತ್ತದೆ ಎಂಬುದಾಗಿ ಬೆದರಿಕೆ ಹಾಕಿದ್ದ’ ಎಂದು ಮೂಲಗಳು ಹೇಳಿವೆ.

    ‘ಕೆಲವು ದಿನಗಳ ನಂತರ ಜೀವವಿಜ್ಞಾನ ವಿಭಾಗದ ಉಪನ್ಯಾಸಕ ಸಂದೀಪ್‌ಗೂ ಈ ವಿಷಯ ಗೊತ್ತಾಗಿತ್ತು. ‘ನೀನು ನರೇಂದ್ರನ ಜೊತೆಗಿರುವ ಫೋಟೊ ಹಾಗೂ ವಿಡಿಯೊಗಳು ನನ್ನ ಬಳಿಯಿವೆ. ನನ್ನ ಜತೆಗೆ ಸಹಕಾರ ನೀಡದಿದ್ದರೆ ಕಾಲೇಜಿನ ಎಲ್ಲರಿಗೂ ವಿಷಯ ತಿಳಿಯುವಂತೆ ಮಾಡುತ್ತೇನೆ ಎಂಬುದಾಗಿ ಬೆದರಿಕೆ ಹಾಕಿ ಬ್ಲ್ಯಾಕ್​ಮೇಲ್ ಮಾಡಲು ಆರಂಭಿಸಿದ್ದ. ನಂತರ, ಸಂದೀಪ್‌ ಸಹ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದ’ ಎಂದು ಮೂಲಗಳು ತಿಳಿಸಿವೆ.

    ಸ್ನೇಹಿತನಿಂದಲೂ ಅತ್ಯಾಚಾರ:
    ವಿದ್ಯಾರ್ಥಿನಿ ಮೇಲೆ ನರೇಂದ್ರ ಹಾಗೂ ಸಂದೀಪ್ ಅತ್ಯಾಚಾರ ಎಸಗಿದ್ದ ಕೊಠಡಿ ಅನೂಪ್‌ಗೆ ಸೇರಿತ್ತು. ಘಟನೆ ಬೆನ್ನಲ್ಲೇ ವಿದ್ಯಾರ್ಥಿನಿಯನ್ನು ಸಂಪರ್ಕಿಸಿದ್ದ ಅನೂಪ್, ‘ನೀನು ನನ್ನ ಕೊಠಡಿಗೆ ಬಂದು ಹೋಗಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನನ್ನ ಕೊಠಡಿಯಲ್ಲಿ ಕ್ಯಾಮೆರಾವಿದೆ. ನನ್ನ ಜತೆಗೂ ಸಹಕಾರ ನೀಡಬೇಕು ಎಂದು ಬ್ಲ್ಯಾಕ್‌ಮೇಲ್ ಮಾಡಿ ಅತ್ಯಾಚಾರ ಎಸಗಿದ್ದ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    ‘ಭಯ ಪಡಬೇಡಿ ದೂರು ನೀಡಿ’
    ಸಂತ್ರಸ್ತೆಗೆ ಆಪ್ತಸಮಾಲೋಚನೆ ನಡೆಸಿ ಧೈರ್ಯ ತುಂಬಲಾಗಿದೆ. ‘ವಾರದ ಹಿಂದೆ ಹೆಣ್ಣು ಮಗಳೊಬ್ಬಳು ಪೋಷಕರ ಜತೆಗೆ ಬಂದು ದೂರು ನೀಡಿದ್ದಳು. ಆ ಮಗುವಿಗೆ ಬ್ಲ್ಯಾಕ್‌ಮೇಲ್‌ ಮಾಡುತ್ತಾ ಶೋಷಣೆ ಮಾಡಿರುವುದು ಗೊತ್ತಾಗಿದೆ. ಆರೋಪಿಗಳು ಸಾಮಾಜಿಕ ಮಾಧ್ಯಮಗಳನ್ನೂ ಬಳಸಿಕೊಂಡು ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದಾರೆ. ಸದ್ಯ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೂ ತನ್ನ ಹೇಳಿಕೆ ದಾಖಲಿಸಿದ್ದಾಳೆ’ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ತಿಳಿಸಿದ್ದಾರೆ. ‘ಹೆಣ್ಣು ಮಗಳು ಧೈರ್ಯ ತೋರಿ ದೂರು ನೀಡಿದ್ದಾಳೆ. ಬ್ಲ್ಯಾಕ್‌ಮೇಲ್‌ಗೆ ಒಳಗಾಗದೇ ದೂರು ನೀಡಬೇಕು. ಹೆದರಿಕೊಂಡರೆ ನೀವೇ ಬಲಿಪಶು ಆಗುತ್ತೀರಿ. ಆರೋಪಿಗಳು ಶೋಷಣೆ ಮಾಡುತ್ತಲೇ ಇರುತ್ತಾರೆ. ಯಾವುದಾದರೂ ತಪ್ಪುಗಳು ನಡೆದರೆ ತಂದೆ –ತಾಯಿಗೆ ಮೊದಲು ತಿಳಿಸಬೇಕು. ನಂತರ ಹತ್ತಿರದ ಠಾಣೆಗೆ ಮಾಹಿತಿ ನೀಡಬೇಕು. ಅದೂ ಸಾಧ್ಯವಾಗದಿದ್ದರೆ ಮಹಿಳಾ ಆಯೋಗಕ್ಕೆ ತಿಳಿಸಿ’ ಎಂದು ನಾಗಲಕ್ಷ್ಮೀ ಮನವಿ ಮಾಡಿದರು.

  • ಸಮೋಸ, ಪಿಜ್ಜಾಗಳಲ್ಲಿನ ಸಕ್ಕರೆ-ಎಣ್ಣೆ ಪ್ರಮಾಣ ಪ್ರದರ್ಶಿಸಿ:
 ಕೇಂದ್ರ ಆರೋಗ್ಯ ಇಲಾಖೆ ಆದೇಶಿಸಲು ಕಾರಣವೇನು?

    ಸಮೋಸ, ಪಿಜ್ಜಾಗಳಲ್ಲಿನ ಸಕ್ಕರೆ-ಎಣ್ಣೆ ಪ್ರಮಾಣ ಪ್ರದರ್ಶಿಸಿ: ಕೇಂದ್ರ ಆರೋಗ್ಯ ಇಲಾಖೆ ಆದೇಶಿಸಲು ಕಾರಣವೇನು?

    ನವದೆಹಲಿ: ಬೊಜ್ಜು ಹಾಗೂ ಸಾಂಕ್ರಾಮಿಕವಲ್ಲದ ರೋಗಗಳನ್ನು ನಿಯಂತ್ರಿಸಿ, ಆರೋಗ್ಯಯುತ ಜೀವನಶೈಲಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಮೋಸಾ, ಕಚೋರಿ ಹಾಗೂ ಪಿಜ್ಜಾ ಸೇರಿದಂತೆ ಎಲ್ಲ ಕುರುಕಲು ತಿಂಡಿಗಳಲ್ಲಿರುವ ‘ಎಣ್ಣೆ’ ಹಾಗೂ ‘ಸಕ್ಕರೆ’ ಪ್ರಮಾಣವನ್ನು ಪೊಟ್ಟಣಗಳ ಮೇಲೆ ಮುದ್ರಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಎಲ್ಲ ಸಚಿವಾಲಯ ಹಾಗೂ ವಿಭಾಗಗಳಿಗೆ ಸೂಚನೆ ಕಳುಹಿಸಿದೆ.
    ಬೊಜ್ಜು ವಿರುದ್ಧ ಹೋರಾಡುವ ನಿಟ್ಟಿನಲ್ಲಿ ಲೆಟರ್‌ಹೆಡ್‌, ನೋಟ್‌ಪ್ಯಾಡ್‌, ಪೋಲ್ಡರ್‌ಗಳಲ್ಲಿಯೂ ಆರೋಗ್ಯಕ್ಕೆ ಸಂಬಂಧಿಸಿದ ಸಂದೇಶಗಳನ್ನು ಪ್ರಕಟಿಸಬೇಕು ಎಂದು ಹೇಳಿದೆ.

  • 500 ಕೋಟಿ ಮಹಿಳೆಯರಿಂದ ಉಚಿತ ಬಸ್ ಪ್ರಯಾಣ: 
500ನೇ ಕೋಟಿಯ ಟಿಕೆಟ್ ನೀಡಿದ ಸಿದ್ದರಾಮಯ್ಯ

    500 ಕೋಟಿ ಮಹಿಳೆಯರಿಂದ ಉಚಿತ ಬಸ್ ಪ್ರಯಾಣ: 500ನೇ ಕೋಟಿಯ ಟಿಕೆಟ್ ನೀಡಿದ ಸಿದ್ದರಾಮಯ್ಯ

    ಬೆಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆ ಅಡಿ 500 ಕೋಟಿ ಮಹಿಳೆಯರು ಪ್ರಯಾಣಿಸಿದ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟ್ ಅನ್ನು ವಿತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳೆ ಲತಾ ಅವರನ್ನು ಸನ್ಮಾನಿಸಿದರು. ಬಸ್ಸಿನಲ್ಲಿದ್ದ ಮಹಿಳೆಯರಿಗೆ ಇಳಕಲ್ ಸೀರೆ, ಸಿಹಿ ವಿತರಿಸಲಾಯಿತು. ಶಕ್ತಿ ಯೋಜನೆಯ ಫಲಾನುಭವಿಯೊಬ್ಬರು ಮುಖ್ಯಮಂತ್ರಿ ಮತ್ತು ಸಚಿವರಿಗೆ ಖಡಕ್ ರೊಟ್ಟಿ, ಶೇಂಗಾ ಹೋಳಿಗೆ ನೀಡಿ ಹಾರೈಸಿದರು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಮಾಜ ಕಲ್ಯಾಣ ಸಚಿವ ಹೆಚ್ ಸಿ. ಮಹದೇವಪ್ಪ, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ. ರೇವಣ್ಣ, ಮಹಿಳಾ ಆಯೋಗದ ಅಧ್ಯಕ್ಷ ನಾಗಲಕ್ಷ್ಮಿ ಚೌಧರಿ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಸೌಮ್ಯ ರೆಡ್ಡಿ ಉಪಸ್ಥಿತರಿದ್ದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡಿ 2023 ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವ ಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜೂನ್ 11ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.