Tag: vijayalaxmi shibaruru

  • ಮುಟ್ಟಿನ ಆರೈಕೆ ಸಾಂವಿಧಾನಿಕ ಹಕ್ಕು: 
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು

    ಮುಟ್ಟಿನ ಆರೈಕೆ ಸಾಂವಿಧಾನಿಕ ಹಕ್ಕು: ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು

    ನವದೆಹಲಿ: ಮಹಿಳೆಯರ ಆರೋಗ್ಯ ಮತ್ತು ಘನತೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಒಂದು ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ ತೀರ್ಪನ್ನು ನೀಡಿದೆ. ಋತುಚಕ್ರದ ಆರೋಗ್ಯ ಮತ್ತು ನೈರ್ಮಲ್ಯವು ಕೇವಲ ವೈಯಕ್ತಿಕ ವಿಷಯವಲ್ಲ, ಅದು ಸಂವಿಧಾನದ 21ನೇ ವಿಧಿಯಡಿ ಪ್ರತಿಯೊಬ್ಬ ಮಹಿಳೆಯ “ಅಂತಸ್ಸಿನಿಂದ ಬದುಕುವ ಮೂಲಭೂತ ಹಕ್ಕು” ಎಂದು ನ್ಯಾಯಾಲಯ ಘೋಷಿಸಿದೆ.

    ಜಸ್ಟಿಸ್ ಜೆ.ಬಿ. ಪಾರ್ದಿವಾಲಾ ಮತ್ತು ಜಸ್ಟಿಸ್ ಆರ್. ಮಹದೇವನ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಮಹತ್ವದ ತೀರ್ಪನ್ನು ಪ್ರಕಟಿಸಿದೆ.

    ತೀರ್ಪಿನ ಪ್ರಮುಖ ಮುಖ್ಯಾಂಶಗಳು:

    ರಾಷ್ಟ್ರೀಯ ನೀತಿಯ ಅಗತ್ಯ: ದೇಶಾದ್ಯಂತ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್‌ಗಳನ್ನು ವಿತರಿಸಲು ಮತ್ತು ಶಾಲೆಗಳಲ್ಲಿ ನೈರ್ಮಲ್ಯ ಕಾಪಾಡಲು ಸಮಗ್ರ ‘ರಾಷ್ಟ್ರೀಯ ಮಾದರಿ ನೀತಿ’ಯನ್ನು ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ.

    ಪ್ರತ್ಯೇಕ ಶೌಚಾಲಯ ವ್ಯವಸ್ಥೆ: ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಮತ್ತು ಸುರಕ್ಷಿತ ಶೌಚಾಲಯಗಳ ವ್ಯವಸ್ಥೆ ಇರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಪೀಠವು ನಿರ್ದೇಶಿಸಿದೆ.

    ಶಿಕ್ಷಣದ ಹಕ್ಕು: ಋತುಚಕ್ರದ ಸಮಯದಲ್ಲಿ ಸರಿಯಾದ ಸೌಲಭ್ಯಗಳಿಲ್ಲದೆ ಅನೇಕ ಹೆಣ್ಣುಮಕ್ಕಳು ಶಾಲೆಗೆ ಗೈರುಹಾಜರಾಗುತ್ತಿದ್ದಾರೆ ಅಥವಾ ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸುತ್ತಿದ್ದಾರೆ. ಇದು ಅವರ ಶಿಕ್ಷಣದ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ನ್ಯಾಯಾಲಯ ಕಳವಳ ವ್ಯಕ್ತಪಡಿಸಿದೆ.

    ಅರಿವು ಮೂಡಿಸುವಿಕೆ: ಋತುಚಕ್ರದ ಬಗ್ಗೆ ಸಮಾಜದಲ್ಲಿರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ಮತ್ತು ವಿದ್ಯಾರ್ಥಿನಿಯರಲ್ಲಿ ಅರಿವು ಮೂಡಿಸಲು ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದು ತೀರ್ಪಿನಲ್ಲಿ ಹೇಳಲಾಗಿದೆ.: “ಋತುಚಕ್ರದ ನೈರ್ಮಲ್ಯವು ಕೇವಲ ವೈದ್ಯಕೀಯ ಅಗತ್ಯವಲ್ಲ, ಅದು ಮಹಿಳೆಯರ ಘನತೆಮತ್ತು ಸ್ವಾತಂತ್ರ್ಯದ ಪ್ರಶ್ನೆಯಾಗಿದೆ.”ಎಂದು ಅದು ತಿಳಿಸಿದೆ

    ಮಹಿಳಾ ಸಬಲೀಕರಣದ ಹಾದಿಯಲ್ಲಿ ಈ ತೀರ್ಪು ಒಂದು ಮೈಲಿಗಲ್ಲಾಗಿದ್ದು, ಮುಂಬರುವ ದಿನಗಳಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿನಿಯರ ಆರೋಗ್ಯ ಮತ್ತು ಶಿಕ್ಷಣದ ಮೇಲೆ ಇದು ಸಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಆಶಿಸಲಾಗಿದೆ.

  • “ಯತ್ನಾಳರೇ, ಮುಸ್ಲಿಮ್ ಹೆಣ್ಣು ಮಕ್ಕಳ ವಿಷಯಕ್ಕೆ ಬರಬೇಡಿ” 
‘ಮುಸ್ಲಿಮ್ ಯುವಜನ ಪರಿಷತ್’ ತಾಕೀತು ಮಾಡಲು ಕಾರಣವೇನು?

    “ಯತ್ನಾಳರೇ, ಮುಸ್ಲಿಮ್ ಹೆಣ್ಣು ಮಕ್ಕಳ ವಿಷಯಕ್ಕೆ ಬರಬೇಡಿ” ‘ಮುಸ್ಲಿಮ್ ಯುವಜನ ಪರಿಷತ್’ ತಾಕೀತು ಮಾಡಲು ಕಾರಣವೇನು?

    ‘ಮುಸ್ಲಿಂ ಹೆಣ್ಣು ಮಕ್ಕಳ ವಿವಾಹದ ಬಗ್ಗೆ ಅವರ ಅಪ್ಪ ಅಮ್ಮ, ಜಮಾತ್‌ನವರು ಚಿಂತಿಸುತ್ತಾರೆ. ಬಿಜೆಪಿಯ ಶಾಸಕ ಬಸನಗೌಡ ಯತ್ನಾಳ್ ಅವರಿಗೆ ಈ ಚಿಂತೆ ಬೇಡ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್‌ ತಿರುಗೇಟು ನೀಡಿದೆ.

    ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಅಧ್ಯಕ್ಷ ಅಶ್ರಫ್ ಕಲ್ಲೇಗ, ಮುಸ್ಲಿಂ ಯುವತಿಯನ್ನು ವಿವಾಹವಾದ ಹಿಂದೂ ಯುವಕನಿಗೆ ₹ 5 ಲಕ್ಷ ಬಹುಮಾನ ನೀಡುವುದಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿರುವುದು. ಮುಸ್ಲಿಂ ಸಮುದಾಯದ ಖಬರ್‌ಸ್ಥಾನಗಳ ಬಗ್ಗೆ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರು ಹೇಳಿಕೆ ನೀಡಿರುವುದು ಖಂಡನೀಯ ಎಂದು ಹೇಳಿದರು.

    ‘ಧರ್ಮಸ್ಥಳ ಪ್ರಕರಣದಲ್ಲಿ ದೂರು ನೀಡಿರುವ ಸಾಕ್ಷಿ ದೂರುದಾರ ಮುಸ್ಲಿಂ ಸಮಾಜಕ್ಕೆ ಸೇರಿದವನು ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಸುಳ್ಳು ಹೇಳಿಕೆ ನೀಡಿದ್ದಾರೆ. ಈ ಪ್ರಕರಣದಲ್ಲಿ ಪಿಎಫ್ಐ ಕೈವಾಡ ಇದೆ ಎಂದು ಬಿಜೆಪಿ ಶಾಸಕ ಅಶ್ವತ್ಥ ನಾರಾಯಣ ಹೇಳಿದ್ದಾರೆ. ನಿಷೇಧಿತ ಸಂಘಟನೆ ಪಿಎಫ್ಐ ಕೈವಾಡದ ಬಗ್ಗೆ ಮಾಹಿತಿ ಇದ್ದರೆ ಅವರದೇ ಕೇಂದ್ರ ಸರ್ಕಾರದ ಮೂಲಕ ತನಿಖೆ ಕೈಗೊಳ್ಳಲಿ’ ಎಂದು ಸವಾಲು ಹಾಕಿದರು.

    ‘ಧರ್ಮಸ್ಥಳ ವಿಚಾರವಾಗಿ ಮುಸ್ಲಿಂ ಸಮುದಾಯ ಯಾವೊಬ್ಬ ಪ್ರಮುಖರು ಮಾತನಾಡಿಲ್ಲ. ಮುಸ್ಲಿಂ ಸಮುದಾಯದ ಬಗ್ಗೆ ಹೆಗ್ಗಡೆಯವರಿಗೆ ಪ್ರೀತಿ ಇದೆ. ಅಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಇದ್ದಾರೆ. ಆದರೆ ಧರ್ಮಸ್ಥಳವನ್ನು ಮುಜರಾಯಿ ಇಲಾಖೆಗೆ ಸೇರಿಸಬೇಕು ಎಂದು ಈ ಹಿಂದೆ ಯತ್ನಿಸಿ ಅದಕ್ಕೆ ಪರ್ಯಾಯವಾಗಿ ಕನ್ಯಾಡಿ ಕ್ಷೇತ್ರದ ಆರಂಭಕ್ಕೆ ಕಾರಣರಾದ ಜನಾರ್ದನ ಪೂಜಾರಿ ಅವರಿಗೆ ಈಗ ಧರ್ಮಸ್ಥಳದ ಮೇಲೆ ಪ್ರೀತಿ ಉಕ್ಕಿ ಹರಿಯುತ್ತಿದೆ. ಅದಕ್ಕಾಗಿ ಅವರು ಈ ರೀತಿಯ ಹೇಳಿಕೆ ನೀಡಲು ಆರಂಭಿಸಿದ್ದಾರೆ’ ಎಂದು ಅವರು ದೂರಿದರು.

    ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಕೋಶಾಧಿಕಾರಿ ಅಶ್ರಫ್ ಬಾವು ಪಡೀಲ್, ಪ್ರಧಾನ ಕಾರ್ಯದರ್ಶಿ ನೌಷದ್ ಬೊಳುವಾರು, ಕಾರ್ಯದರ್ಶಿ ಬಶೀರ್ ಪರ್ಲಡ್ಕ, ಮುಖಂಡ ಹಂಝ ಕಬಕ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.